No Ads

ಸರಕಾರಿ ಮಹಿಳಾ ಕಾಲೇಜು ಮಹಿಳಾ ಶಿಕ್ಷಣಕ್ಕೆ ಮಾದರಿಯಾಗಲಿ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

ಕರ್ನಾಟಕ 2025-05-28 10:49:23 54
post

ಧಾರವಾಡ, ಮೇ.27: 2014 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧಾರವಾಡಕ್ಕೆ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾರಂಭಿಸಲು ಅನುಮೋದನೆ ನೀಡಿದ್ದು, 10 ಮಕ್ಕಳೊಂದಿಗೆ ಪ್ರಾರಂಭವಾದ ಈ ಕಾಲೇಜಿನಲ್ಲಿ ಈಗ 450 ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. ಈ ನೂತನ ಕಟ್ಟಡವು 3.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು. 

 ಬೆಳಗ್ಗೆ ನಗರದ ಜಿಲ್ಲಾ ಕ್ರೀಡಾಂಗಣದ ಮುಂಭಾಗದಲ್ಲಿ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡದ ಭೂಮಿ ಪೂಜೆ ಹಾಗೂ ಅಡಿಗಲ್ಲು ಕಾರ್ಯಕ್ರಮವನ್ನು ನೆರವೇರಿಸಿ ಅವರು ಮಾತನಾಡಿದರು. 

ಮೊದಲು ಹಳ್ಳಿಗಳಲ್ಲಿ ಹೆಣ್ಣು ಮಕ್ಕಳು ಶಾಲೆಗೆ ಹೋಗುತ್ತಿರಲಿಲ್ಲ. ಬಿಸಿ ಊಟ ಪ್ರಾರಂಭವಾದ ಮೇಲೆ ಬಡವರ ಮಕ್ಕಳಿಗೆ ಅನುಕೂಲವಾಗಿ ಹೆಣ್ಣು ಮಕ್ಕಳು ಶಾಲೆಗೆ ಹೋಗಲು ಪ್ರಾರಂಭಿಸಿದರು. ಆ ಸಮಯದಿಂದ ತರಗತಿಯಲ್ಲಿ ಹೆಣ್ಣು ಮತ್ತು ಗಂಡು ಮಕ್ಕಳು ಸಮವಾಗಿರಲು ಆರಂಭವಾಯಿತು. ಆದರೆ ಈ ದಿನಗಳಲ್ಲಿ ಕೆಲವೊಂದು ಶಾಲಾ ಕೊಠಡಿಗಳಲ್ಲಿ ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳು ಹೆಚ್ಚಾಗಿ ಕಾಣುತ್ತಿದ್ದಾರೆ ಎಂದು ಸಚಿವರು ಹೇಳಿದರು. 

ಈಗೀಗ ರಾಜ್ಯಮಟ್ಟದಲ್ಲಿ ಹೆಣ್ಣು ಮಕ್ಕಳು ಪ್ರಥಮ ಸ್ಥಾನ ಪಡೆಯುತ್ತಿದ್ದಾರೆ. ಹಾಗೆ ವಿಶ್ವವಿದ್ಯಾಲಯದಲ್ಲಿ ಮೊದಲನೆಯ ರ್ಯಾಂಕ್ ಕೂಡ ಹೆಣ್ಣುಮಕ್ಕಳದೇ ಆಗಿರುತ್ತದೆ. ಹೆಣ್ಣು ಮಕ್ಕಳಿಗೆ ಅನುಕೂಲವಾಗಲಿ ಎಂದು ಪ್ರತ್ಯೇಕ ಕಾಲೇಜು ತೆರೆಯಲು ಸರ್ಕಾರ ಅನುಮತಿ ನೀಡಿದೆ ಎಂದು ಹೇಳಿದರು.

ಬಸವಣ್ಣವರು ಮತ್ತು ಅಂಬೇಡ್ಕರ್ ಅವರ ತತ್ವಗಳನ್ನು ಅರಿತುಕೊಳ್ಳಬೇಕು. ಅವರು ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಸಮಾನತೆಯನ್ನು ತೋರಿಸಿಕೊಟ್ಟವರು. ಹಾಗೆ ಬದುಕಲು ದಾರಿ ಕಲ್ಪಿಸಿದವರು. ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸುವ ಮೂಲಕ ಸಮಾಜದಲ್ಲಿ ಹೆಣ್ಣು ಮಕ್ಕಳ ಗೌರವವನ್ನು ಹೆಚ್ಚಿಸಿದ್ದಾರೆ. ಈಗಿನ ಕಾಲಘಟ್ಟದಲ್ಲಿ ಹೆಣ್ಣು ಮಕ್ಕಳು ಐಎಎಸ್ ಅಧಿಕಾರಿಯಾಗಬಹುದು. ಹುಟ್ಟಿದ ಮನೆಯಲ್ಲಿ ಹೊಲ ಮತ್ತು ಮನೆಯಲ್ಲಿ ಪಾಲುದಾರರಾಗಬಹುದು. ಇದಕ್ಕೆ ಮೂಲ ಕಾರಣಿಕರ್ತರು ಅಂಬೇಡ್ಕರ್ ಅವರು ನೀಡಿದ ಸಂವಿಧಾನ. ಹೆಣ್ಣು ಮಕ್ಕಳು ಅಂಬೇಡ್ಕರ್ ಅವರ ಕೊಡುಗೆಗಳನ್ನು ಸದಾ ಸ್ಮರಿಸಬೇಕು ಎಂದು ಸಚಿವರು ತಿಳಿಸಿದರು. 

ಈಗಿನ ಪೀಳಿಗೆಯವರ ಮೇಲೆ ಜವಾಬ್ದಾರಿ ಹೆಚ್ಚಾಗಿದೆ. ಸಮಾಜವನ್ನು ಕಟ್ಟುವ ನಿರ್ಧಾರವನ್ನು ಮಾಡಿ, ರಾಜಕಾರಣದಲ್ಲಿ ಆಗುಹೋಗುಗಳನ್ನು ಹತ್ತಿರದಿಂದ ಗಮನಿಸಿ, ದೇಶದ ಒಳ್ಳೆಯ ಪ್ರಜೆಯಾಗಿ ಬೆಳೆಯಬೇಕು ಎಂದು ವಿದ್ಯಾರ್ಥಿಗಳಿಗೆ ಬುದ್ಧಿಮಾತು ಹೇಳಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಸಕ ಅರವಿಂದ ಬೆಲ್ಲದ ಅವರು ಮಾತನಾಡಿದರು. 

ಜಿಲ್ಲಾಧಿಕಾರಿ ದಿವ್ಯ ಪ್ರಭು, ಕಾಲೇಜು ಪ್ರಾಂಶುಪಾಲ ಡಾ.ಎಸ್.ಎಸ್.ಅಂಗಡಿ, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಮಹಾಪೌರ ರಾಮಣ್ಣ ಬಡಿಗೇರ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ, ಮಹಾನಗರ ಪೊಲೀಸ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಮಹಾನಗರ ಪಾಲಿಕೆ ಸದಸ್ಯರಾದ ಸುರೇಶ ಬೆದ್ರೆ, ಡಾ.ಮಯೂರ ಮೋರೆ, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಪ್ರಕಾಶ ಹೊಸಮನಿ ಸೇರಿದಂತೆ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಕಾಲೇಜು ಅಧ್ಯಾಪಕರು, ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

No Ads
No Reviews
No Ads

Popular News

No Post Categories
Sidebar Banner
Sidebar Banner